
ಬೆಳಗಾವಿ: ಅಥಣಿ ಪಟ್ಟಣಕ್ಕೆ ಐಜಿಪಿ ಚೇತನ್ ಸಿಂಗ್ ರಾಥೋಡ್ ಭೇಟಿ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಪರಿಶೀಲನೆ ಹಾಗೂ ವಿಶೇಷ ಕಾರ್ಯಾಚರಣೆಯನ್ನು ಕೈಗೊಂಡಿತು.
ಐಜಿಪಿ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳುವಾಗಿದ್ದ ಮೊಬೈಲ್ಗಳನ್ನು ಪತ್ತೆಹಚ್ಚುವ ಮಹತ್ವದ ಸಾಧನೆ ಕಂಡುಬಂದಿದೆ.
ಮಾರ್ಚ್ 27, 2026ರಂದು ನಡೆದ ಕಾರ್ಯಾಚರಣೆಯಲ್ಲಿ ಸುಮಾರು 100ಕ್ಕೂ ಹೆಚ್ಚು ಮೊಬೈಲ್ಗಳನ್ನು ವಶಕ್ಕೆ ಪಡೆಯಲಾಗಿದೆ.
ಪತ್ತೆಯಾದ ಮೊಬೈಲ್ಗಳಲ್ಲಿ ಶಿಯೋಮಿ, ರಿಯಲ್ಮಿ, ಒಪ್ಪೊ, ವೀವೋ, ಸ್ಯಾಮ್ಸಂಗ್ ಸೇರಿದಂತೆ ವಿವಿಧ ಕಂಪನಿಗಳ ಸಾಧನಗಳು ಸೇರಿವೆ. ಡಿವೈಎಸ್ಪಿ ಪ್ರಶಾಂತ್ ಮುನ್ನೋಳಿ, ಸಿಪಿಐ ಸಂತೋಷ್ ಹಳ್ಳೂರ್ ,ಪಿಎಸ್ಐ ಗಿರಿಮಲ್ಲಪ್ಪ ಉಪ್ಪಾರ್ ಹಾಗೂ ಸಿಬ್ಬಂದಿಗಳ ಸಮನ್ವಯದೊಂದಿಗೆ ಈ ಕಾರ್ಯಾಚರಣೆ ಯಶಸ್ವಿಯಾಗಿ ನೆರವೇರಿದೆ.
ಈ ವೇಳೆ ಐಜಿಪಿ ಚೇತನ್ ಸಿಂಗ್ ರಾಥೋಡ್ ಮಾತನಾಡಿ, ಸಾರ್ವಜನಿಕರ ಭದ್ರತೆಗಾಗಿ ಪೊಲೀಸ್ ಇಲಾಖೆ ಇಂತಹ ಕಾರ್ಯಾಚರಣೆಗಳನ್ನು ನಿರಂತರವಾಗಿ ನಡೆಸುತ್ತಿದೆ ಎಂದರು. ಜನರು ತಮ್ಮ ಮೊಬೈಲ್ ಕಳೆದುಕೊಂಡ ತಕ್ಷಣವೇ “KSP App” ಮೂಲಕ E-Lost ವರದಿ ಸಲ್ಲಿಸಿ, CEIR ವೆಬ್ಸೈಟ್ನಲ್ಲಿ ಮೊಬೈಲ್ನ್ನು ಬ್ಲಾಕ್ ಮಾಡಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.
ಇಂತಹ ಕಾರ್ಯಾಚರಣೆಗಳ ಯಶಸ್ಸಿಗೆ ಜನರ ಸಹಕಾರವೇ ಪ್ರಮುಖ ಕಾರಣವಾಗಿದ್ದು, ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರ ಸಹಭಾಗಿತ್ವ ಮುಂದುವರಿಯಬೇಕು ಎಂದು ಅವರು ತಿಳಿಸಿದರು.
ವರದಿ ವಿಠ್ಠಲ ಖೋಕಾಟೆ




















