
ಸರ್ಕಾರಿ ಶಾಲಾ ಕಾಲೇಜ್ ಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿರುವುದರಿಂದ ಅಲ್ಲೇ ಶಿಕ್ಷಣ ಪಡೆಯಲು ಮುಂದಾಗಬೇಕು ಎಂದು ಷಾಮಿಯಾಚಂದ್ ಸರ್ಕಾರಿ ಪಿಯು ಕಾಲೇಜಿನ ಪ್ರಾಚಾರ್ಯ ಸಿದ್ಧಣ್ಣ ಪರಮೇಶ್ವರ್ ಹೇಳಿದರು.
ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಕಾಲೇಜಿನ ನಾನಾ ಸಮಿತಿಗಳ ಕಾಲಾವಧಿ ಮುಕ್ತಾಯ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು. ಸರ್ಕಾರಿ ಶಾಲೆ, ಕಾಲೇಜುಗಳನ್ನು ಉಳಿಸುವುದು ಪ್ರತಿ ಕನ್ನಡಿಗರ ಕರ್ತವ್ಯವಾಗಿದೆ. ಕೈಗೆಟುಕುವ ದರದಲ್ಲಿ ಗುಣಾತ್ಮಕ ಶಿಕ್ಷಣವನ್ನು ಸರ್ಕಾರದ ಶಾಲೆ, ಕಾಲೇಜುಗಳಲ್ಲಿ ಮಾತ್ರ ಪಡೆಯಲು ಸಾಧ್ಯ ಎಂದರು. ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯ ಸಿಂಡಿಕೇಟ್ ಸದಸ್ಯ ಕೆ.ಶಿವಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವನೆಯನ್ನು ಮೈಗೂಡಿಸಿಕೊಳ್ಳಬೇಕು. ವಿವಿಯಿಂದ ಹೊಸ ಕೋರ್ಸ್ಗಳನ್ನು ಪರಿಚಯಿಸಿದ್ದು, ಸದ್ಬಳಕೆಮಾಡಿಕೊಳ್ಳಬೇಕಿದೆ ಎಂದರು. 2025-26ನೇ ಶೈಕ್ಷಣಿಕ ಸಾಲಿನಲ್ಲಿ ಹೆಚ್ಚು ಅಂಕಗಳಿಸಿದ ಬಿಕಾಂ ಪದವಿಯ ಸಂಗೀತ, ಸುಷ್ಮಾ, ಬಿಎ ಪದವಿಯ ವೀರೇಶ್ ಅವರನ್ನು ಗೌರವಿಸಲಾಯಿತು. ಕನ್ನಡ ಹಿತರಕ್ಷಕ ಸಂಘದ ಗೌರವಾಧ್ಯಕ್ಷ ಕ.ಮ.ಹೇಮಯ್ಯಸ್ವಾಮಿ, ಸಹಾಯಕ ಪ್ರಾಧ್ಯಾಪಕರಾದ ಡಾ.ಅನ್ನಪೂರ್ಣ ಗುಡದೂರ, ಟಿ. ಎಂ. ರಾಜ್ಮಾ , ಡಾ.ಚಂದ್ರಶೇಖರ್ ವಿ.ಬಿಳಿಗುಡ್ಡ, ಎ.ಜಿ.ವೀರಭದ್ರಪ್ಪ, ಕೆ.ಕುಮಾರ್, ರುದ್ರಮುನಿ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















