ಸಿರಿಗೇರಿ ಗ್ರಾಮದ ಹುಲಿಗೆಮ್ಮದೇವಿ ದೇವಸ್ಥಾನದ ಆವರಣದಲ್ಲಿ ತಂಬಾಕು ಸೇವನೆಯ ಮಾರಕ ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಮತ್ತು ತಂಬಾಕು ಮುಕ್ತ ಸಮಾಜ ನಿರ್ಮಿಸುವ ಸಂಕಲ್ಪದೊಂದಿಗೆ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಂಬಾಕು ವಿರೋಧಿ ದಿನಾಚರಣೆಯನ್ನು ಸಂಪನ್ಮೂಲ ವ್ಯಕ್ತಿ ಪುನೀತ್ ಕುಮಾರ ರವರು ಉದ್ಘಾಟಿಸಿ ಮಾತನಾಡಿದ ಅವರು ತಂಬಾಕು ಸೇವನೆಯು ಮಾನವನ ಆರೋಗ್ಯಕ್ಕೆ ಅತ್ಯಂತ ಅಪಾಯಕಾರಿಯಾಗಿದ್ದು, ಇದು ಕ್ಯಾನ್ಸರ್, ಹೃದಯಾಘಾತ, ಶ್ವಾಸಕೋಶದ ಕಾಯಿಲೆಗಳು ಮತ್ತು ಪಾರ್ಶ್ವವಾಯು ಮುಂತಾದ ಮಾರಣಾಂತಿಕ ಕಾಯಿಲೆಗಳಿಗೆ ಪ್ರಮುಖ ಕಾರಣವಾಗಿದೆ. ತಂಬಾಕು ಬಳಸುವ ವ್ಯಕ್ತಿಯಷ್ಟೇ ಅಲ್ಲದೆ, ಅವರ ಸುತ್ತಮುತ್ತಲಿರುವವರ ಆರೋಗ್ಯದ ಮೇಲೆಯೂ ಇದು ದುಷ್ಪರಿಣಾಮ ಬೀರುತ್ತದೆ. ಯುವ ಸಮುದಾಯವು ಈ ದುಶ್ಚಟಕ್ಕೆ ಬಲಿಯಾಗದಂತೆ ತಡೆಯುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ಸಂಸ್ಥೆಯ ಕೃಷಿ ಮೇಲ್ವಿಚಾರಕ ವೀರೇಶ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗ್ರಾಮದಲ್ಲಿನ ಕುಟುಂಬಗಳ ಅಭಿವೃದ್ಧಿ ಜೊತೆಗೆ ಸಮಾಜದ ಪಿಡುಗುಗಳ ಬಗ್ಗೆ ಜಾಗೃತಿಯನ್ನು ಮೂಡಿಸಿ ಸ್ವಸ್ಥ ಸಮಾಜ ನಿರ್ಮಾಣ ಮಾಡುವುದಾಗಿದೆ. ತಂಬಾಕು ನಿಯಂತ್ರಣಕ್ಕಾಗಿ ಸರ್ಕಾರಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದರೂ, ಸಾರ್ವಜನಿಕರ ವೈಯಕ್ತಿಕ ಜಾಗೃತಿ ಅತ್ಯಗತ್ಯ. ಪ್ರತಿಯೊಬ್ಬರೂ ತಂಬಾಕು ಉತ್ಪನ್ನಗಳನ್ನು ತ್ಯಜಿಸಿ, ಆರೋಗ್ಯಕರ ಮತ್ತು ಸ್ವಸ್ಥ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಈ ಜಾಗೃತಿ ಕಾರ್ಯಕ್ರಮದಲ್ಲಿ ಮೇಲ್ವಿಚಾರಕ ಶಿವಪ್ಪ ಪೂಜಾರ, ಸೇವಾಪ್ರತಿನಿಧಿ ಪಾರ್ವತಿ, ಸಾವಿತ್ರಿ ಸಂಘದ ಸದಸ್ಯರು ಉಪಸ್ಥಿತರಿದ್ದರು.
ವರದಿ : ಮಸೀದಿ ,ಅಬ್ದುಲ್ ಗೌಸ್, ಸಿರುಗುಪ್ಪ




















