ಬಳ್ಳಾರಿ / ಕಂಪ್ಲಿ : ರಾಜ್ಯ ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಮತ್ತು 13 ಮಂದಿ ಹಿರಿಯ ನಾಯಕರು ಸಚಿವರಾಗಿ ಬುಧವಾರ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಆದರೆ ಇದರಲ್ಲಿ ಬಳ್ಳಾರಿ ಜಿಲ್ಲೆಯ ಯಾರೊಬ್ಬರಿಗೂ ಸಚಿವ ಸ್ಥಾನ ಸಿಗಲಿಲ್ಲ.
ಸಚಿವ ಸ್ಥಾನ ಪಡೆಯಲು ಜಿಲ್ಲೆಯ ನಾಲ್ವರು ಶಾಸಕರು ಪ್ರಯತ್ನ ನಡೆಸಿದ್ದರು. ಬಳ್ಳಾರಿ ಗ್ರಾಮಾಂತರ ಶಾಸಕ ಬಿ. ನಾಗೇಂದ್ರ, ಕಂಪ್ಲಿ ಶಾಸಕ ಜೆ.ಎನ್, ಗಣೇಶ್ ಪ್ರಬಲ ಆಕಾಂಕ್ಷಿಯಾಗಿದ್ದರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರೂ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದರು. ಸಂಸದ ಇ. ತುಕಾರಾಂ ತಮ್ಮ ಪತ್ನಿ ಅನ್ನಪೂರ್ಣ ಅವರಿಗೆ ಅವಕಾಶ ನೀಡಬೇಕು ಎಂದು ಹೈಕಮಾಂಡ್ ಮುಂದೆ ಕಸರತ್ತು ನಡೆಸಿದ್ದರು.
ಚಾರ್ಜ್ಶೀಟ್ ಕಂಟಕ: ವಾಲ್ಮೀಕಿ ಹಗರಣದಲ್ಲಿ ಸಿಲುಕಿ ಸಚಿವ ಸ್ಥಾನ ಕಳೆದುಕೊಂಡಿದ್ದ ಶಾಸಕ ಬಿ. ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ನೀಡುವುದಾಗಿ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಅದರಂತೆ ಸಚಿವ ಸ್ಥಾನ ಸಿಗಲೇಬೇಕು ಎಂದು ನಾಗೇಂದ್ರ ಅವರು ಹೈಕಮಾಂಡ್ ಮಟ್ಟದಲ್ಲಿ ಪ್ರಯತ್ನ ನಡೆಸಿದ್ದರು. ಆದರೆ, ಅದೇ ಹೊತ್ತಿಗೆ ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮಂಗಳವಾರ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿತು.
ಇನ್ನೂ ಕಂಪ್ಲಿ ಶಾಸಕ ಜೆ ಎನ್ ಗಣೇಶ ಹೈಕಮಾಂಡ್ ಹಾಗೂ ಹಿರಿಯ ನಾಯಕರೊಂದಿಗೆ ಸಾಕಷ್ಟು ಮಾತುಕತೆ ನಡೆಸಿದ್ದರು, ವಾಲ್ಮೀಕಿ ಕೋಟಾದಲ್ಲಿ ಸಚಿವ ಸ್ಥಾನ ನೀಡುವಂತೆ ಕೋರಿದರು. ಅದರಲ್ಲೂ ಕಂಪ್ಲಿ ಕ್ಷೇತ್ರದ ಅವರ ಬೆಂಬಲಿಗರು ಹಾಗೂ ವಾಲ್ಮೀಕಿ ಮಹಾಸಭಾದ ನಾಯಕರು ಸುದ್ದಿಗೋಷ್ಠಿಗಳನ್ನು ನಡೆಸಿ ಸದಾ ಜನರ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸುತ್ತಿರುವ 24/7 ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಜೆ.ಎನ್. ಗಣೇಶ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಹೈಕಮಾಂಡ್ಗೆ ಒತ್ತಾಯಿಸಿದರು.
” ಮುಂದಿನ ಸಂಪುಟ ವಿಸ್ತರಣೆಯಲ್ಲಿ ಹೈಕಮಾಂಡ್ ನನ್ನ ಹೆಸರನ್ನು ಸಚಿವ ಸ್ಥಾನಕ್ಕೆ ಪರಿಗಣಿಸುವ ವಿಶ್ವಾಸವಿದ್ದು ಎರಡನೇ ಪಟ್ಟಿಯಲ್ಲಿ ಸ್ಥಾನ ಸಿಗಲಿದೆ “.
- ಜೆ. ಎನ್. ಗಣೇಶ, ಶಾಸಕ, ಕಂಪ್ಲಿ ವಿಧಾನಸಭಾ ಕ್ಷೇತ್ರ, ಕಂಪ್ಲಿ.
ಎರಡನೇ ಪಟ್ಟಿಯತ್ತ ಚಿತ್ತ :
ಡಿ.ಕೆ. ಶಿವಕುಮಾರ್ ಅವರ ಸಂಪುಟದ ಮೊದಲ ಹಂತದಲ್ಲಿ ಕೇವಲ ಹಿರಿಯ ಮತ್ತು ಪ್ರಭಾವಿ ನಾಯಕರಿಗೆ ಮಾತ್ರವೇ ಅವಕಾಶ ನೀಡಲಾಗಿದೆ. ರಾಜಕೀಯದ ಇತರೆಲ್ಲ ಸಮೀಕರಣಗಳನ್ನು ಗಮನದಲ್ಲಿಟ್ಟುಕೊಂಡು ಹೈಕಮಾಂಡ್ ಶೀಘ್ರದಲ್ಲೇ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದು ಅದರಲ್ಲಿ ತಮಗೆ ಸಚಿವ ಸ್ಥಾನ ಸಿಗುವ ಸಾಧ್ಯತೆಗಳಿವೆ’ ಎಂದು ಜಿಲ್ಲೆಯ ನಾಯಕರು ಹೇಳಿದ್ದಾರೆ.
ವರದಿ : ಜಿಲಾನಸಾಬ್ ಬಡಿಗೇರ್




















