ಬಳ್ಳಾರಿ ಕಂಪ್ಲಿ : ತಾಲೂಕಿನ ರಾಮಸಾಗರ ಹೊರ ವಲಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಾಚ್ಮ್ಯಾನ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಸಿದ್ದಲಿಂಗಯ್ಯ ಎಂಬಾತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ.
ವಿದ್ಯಾರ್ಥಿನಿಯರ ಆರೋಪದ ಪ್ರಕಾರ, ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸಿದ್ದಲಿಂಗಯ್ಯ ಹಲವು ದಿನಗಳಿಂದ ಅಶ್ಲೀಲವಾಗಿ ಮಾತನಾಡುವುದು, ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗಗಳನ್ನು ಮುಟ್ಟುವುದು ಹಾಗೂ ಈ ವಿಷಯವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಹಾಕುವುದು ಸೇರಿದಂತೆ ಅನಾಚಾರ ವರ್ತನೆ ನಡೆಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಶಾಲಾ ಶಿಕ್ಷಕರು ಹಲವು ಬಾರಿ ಎಚ್ಚರಿಕೆ ನೀಡಿದ್ದರೂ ಆರೋಪಿತ ತನ್ನ ವರ್ತನೆಯನ್ನು ಬದಲಾಯಿಸಿಲ್ಲ ಎಂದು ತಿಳಿದುಬಂದಿದೆ.
ಈ ಕಿರುಕುಳದಿಂದಾಗಿ ಹಲವು ವಿದ್ಯಾರ್ಥಿನಿಯರು ಶಾಲೆ ಹಾಗೂ ವಸತಿ ನಿಲಯದಲ್ಲಿ ಉಳಿಯಲು ಭಯಪಡುತ್ತಿದ್ದು, ಮನೆಗೆ ಮರಳುವ ನಿರ್ಧಾರಕ್ಕೂ ಮುಂದಾಗಿದ್ದರು ಎನ್ನಲಾಗಿದೆ. ಬಳಿಕ ವಿದ್ಯಾರ್ಥಿನಿಯರು ತಮ್ಮ ಪೋಷಕರಿಗೆ ನಡೆದ ಘಟನೆಗಳ ಬಗ್ಗೆ ವಿವರಿಸಿದ್ದು, ಪೋಷಕರು ಹಾಗೂ ಸ್ಥಳೀಯರು ಶಾಲೆಗೆ ಆಗಮಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು ಶಾಲಾ ಆವರಣದಲ್ಲಿ ಸೇರಿ ಆರೋಪಿತ ವಾಚ್ಮ್ಯಾನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಮಕ್ಕಳ ಶಿಕ್ಷಣ ಮತ್ತು ಸುರಕ್ಷತೆಗೆ ಅನುಕೂಲಕರ ವಾತಾವರಣ ನಿರ್ಮಾಣವಾಗಬೇಕಾದ ವಸತಿ ಶಾಲೆಯಲ್ಲೇ ಇಂತಹ ಘಟನೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವೈ.ಎನ್. ಕಾಳೆ ಅವರು ವಸತಿ ಶಾಲೆಗೆ ಭೇಟಿ ನೀಡಿ ಪರಿಸ್ಥಿತಿಯ ಪರಿಶೀಲನೆ ನಡೆಸಿದರು. ಪೋಷಕರ ಹಾಗೂ ವಿದ್ಯಾರ್ಥಿಗಳ ಒತ್ತಾಯದ ಮೇರೆಗೆ ಆರೋಪ ಎದುರಿಸುತ್ತಿರುವ ಸಿದ್ದಲಿಂಗಯ್ಯನನ್ನು ತಕ್ಷಣದಿಂದಲೇ ಕಾಳಘಟ್ಟ ವಸತಿ ಶಾಲೆಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದರು.
ಆದರೆ, ಕೇವಲ ವರ್ಗಾವಣೆ ಕ್ರಮ ಸಾಕಾಗುವುದಿಲ್ಲ. ವಿದ್ಯಾರ್ಥಿನಿಯರ ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸಿ, ಸತ್ಯಾಂಶ ಕಂಡುಬಂದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪೋಷಕರು, ಶಿಕ್ಷಕರು ಹಾಗೂ ಸಾರ್ವಜನಿಕರು ಆಗ್ರಹಿಸಿದ್ದಾರೆ. ಪ್ರಕರಣದ ಕುರಿತು ಸಂಬಂಧಿತ ಇಲಾಖೆಗಳು ಹಾಗೂ ಪೊಲೀಸ್ ಅಧಿಕಾರಿಗಳು ಸೂಕ್ತ ತನಿಖೆ ನಡೆಸುವಂತೆ ಒತ್ತಾಯಗಳು ಕೇಳಿಬರುತ್ತಿವೆ.
ವರದಿ : ಜಿಲಾನಸಾಬ್ ಬಡಿಗೇರ್



















