ಬಳ್ಳಾರಿ / ಕಂಪ್ಲಿ : ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ ಕೆರೆಗಳು, ದೇವಾಯಗಳು, ಕೋಟೆ, ಕೊತ್ತಲಗಳು ಇಂದಿಗೂ ನಮ್ಮ ಕಣ್ಮುಂದೆ ಇದ್ದು,ಇವುಗಳನ್ನು ನೋಡಿದರೆ ಬೆಂಗಳೂರು ನಿರ್ಮಾತೃ ನಾಡ ಪ್ರಭು ಕೆಂಪೇಗೌಡರು ದೂರದೃಷ್ಟಿಯ ಅದ್ವಿತಿಯ ನಾಯಕರಾಗಿದ್ದರು ಎಂದು ತಹಶೀಲ್ದಾರ್ ಜೂಗಲ್ ಮಂಜುನಾಯಕ ತಿಳಿಸಿದರು.
ಅವರು ಶನಿವಾರ ಪಟ್ಟಣದ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ ಏರ್ಪಡಿಸಿದ್ದ ಕೆಂಪೇಗೌಡರ 517ನೇ ಜಯಂತಿ ಸಮಾರಂಭದಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ವಿಶೇಷ ಪೂಜೆಯನ್ನು ಸಲ್ಲಿಸಿ,ಪುಷ್ಪಾರ್ಪಣೆ ಮಾಡಿ ಮಾತನಾಡಿ 1510ರಲ್ಲಿ ಜನಿಸಿದ್ದ ಕೆಂಪೇಗೌಡರು ವಿಜಯನಗರ ಸಾಮ್ರಾಜ್ಯದ ಸಾಮಂತ ರಾಜ್ಯವಾಗಿದ್ದ ಯಲಹಂಕ ನಾಡಿನ ಪಾಳೇಗಾರರಾಗಿದ್ದರು. ಹಂಪಿಯ ವೈಭವವನ್ನು ಕಂಡು ಬೆರಗಾಗಿದ್ದ ಅವರು ತಮ್ಮ ದೂರದೃಷ್ಟಿಯಿಂದ ನಿರ್ಮಿಸಿದ ಬೆಂಗಳೂರು ನಗರ ಕರ್ನಾಟಕದ ರಾಜ್ಯದ ರಾಜಧಾನಿ ಯಾಗಿರುವುದಲ್ಲದೇ ದೇಶದ ಹಾಗೂ ಪ್ರಪಂಚದ ಪ್ರಮುಖ ನಗರಗಳಲ್ಲಿ ಒಂದಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.
ಪುರಸಭೆಯಲ್ಲಿ : ಪಟ್ಟಣದ ಪುರಸಭೆಯಲ್ಲಿ ನಾಡಪ್ರಭು ಕೆಂಪೇಗೌಡರ 517 ನೇ ಜಯಂತಿಯನ್ನು ಆಚರಿಸಲಾಯಿತು. ಕೆಂಪೇಗೌಡರ ಭಾವಚಿತ್ರಕ್ಕೆ ವಿಶೇಷ ಪೂಜೆಯನ್ನು ಸಲ್ಲಿಸಿ ಪುಷ್ಪಾರ್ಪಣೆ ಮಾಡಿದ ನಂತರ ಮಾತನಾಡಿದ ಅಧಿಕಾರಿಗಳು ಬೆಂದಕಾಳೂರಾಗಿದ್ದ ನಗರವನ್ನು ಆಧುನಿಕ ಬೆಂಗಳೂರನ್ನಾಗಿ ಮಾಡುವ ಮೂಲಕ ಕೆಂಪೇಗೌಡರು ರಾಜ್ಯಕ್ಕೆ ದೇಶಕ್ಕೆ ಅದ್ಭುತವಾದ ನಗರವನ್ನು ನೀಡಿದ್ದಾರೆ. ಅತ್ಯಂತ ದೂರದೃಷ್ಟಿಯಿಂದ ಬೆಂಗಳೂರನ್ನು ನಿರ್ಮಿಸಲಾಗಿದೆ ಎಂದು ಅವರ ಕೊಡುಗೆಯನ್ನು ಸ್ಮರಿಸಿದರಲ್ಲದೆ ಪ್ರತಿಯೊಬ್ಬರೂ ಅವರ ಜೀವನಾದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದರು.
ಪಟ್ಟಣವೂ ಸೇರಿದಂತೆ ತಾಲ್ಲೂಕಿನ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ, ಶಾಲಾ ಕಾಲೇಜುಗಳಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಣೆ ಮಾಡಿದರು.
ವರದಿ : ಜಿಲಾನಸಾಬ್ ಬಡಿಗೇರ್




















