ಧಾರವಾಡ ಜಿಲ್ಲೆಯಲ್ಲಿ ಆಗಸ್ಟ್ 15 ರ ಸ್ವಾತಂತ್ರ್ಯ ದಿನೋತ್ಸವದ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಮತ್ತು ಅದ್ಧೂರಿಯಾಗಿ ಆಯೋಜಿಸಬೇಕು. ಅಧಿಕಾರಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಹೇಳಿದರು.
ಅವರು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜರುಗಿದ ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ಯ ಜಿಲ್ಲಾ ಮಟ್ಟದ ಅಧಿಕಾರಿಗಳ ಪೂರ್ವಿಭಾವಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಬೇಕು. ಆಗಸ್ಟ್ 15 ರ ಬೆಳಿಗ್ಗೆ 7:30 ಗಂಟೆಗೆ ಎಲ್ಲಾ ಶಾಲೆ, ಕಾಲೇಜು, ಸಂಘ ಸಂಸ್ಥೆ ಹಾಗೂ ಸರಕಾರಿ ಕಛೇರಿಗಳಲ್ಲಿ ಧ್ವಜಾರೋಹಣ ನೆರವೇರುತ್ತದೆ. 8:30 ಗಂಟೆಗೆ ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕರು ಹಾಗೂ ಸರಕಾರಿ ನೌಕರರು ಸಮಾವೇಶಗೊಳ್ಳುತ್ತಾರೆ.
8:55 ಗಂಟೆಗೆ ಮುಖ್ಯ ಅತಿಥಿಗಳು ಕ್ರೀಡಾಂಗಣಕ್ಕೆ ಆಗಮಿಸಿ, 9 ಗಂಟೆಗೆ ಮುಖ್ಯ ಅತಿಥಿಗಳಿಂದ ಸಾರ್ವಜನಿಕ ಧ್ವಜಾರೋಹಣ ಹಾಗೂ ವಿವಿಧ ದಳಗಳ ವೀಕ್ಷಣೆ ನಡೆಯುತ್ತದೆ. ನಂತರ 9:15 ಗಂಟೆಗೆ ವಿವಿಧ ದಳಗಳಿಂದ ಗೌರವರಕ್ಷೆ ಸ್ವೀಕರಿಸುತ್ತಾರೆ. ಮತ್ತು 9:30 ಗಂಟೆಗೆ ಮುಖ್ಯ ಅತಿಥಿಗಳು ಸ್ವಾತಂತ್ರೋತ್ಸವ ಸಂದೇಶ ನೀಡುತ್ತಾರೆ. ನಂತರ ಸಾಧಕರಿಗೆ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುತ್ತವೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಹೇಳಿದರು.
ಸ್ವಾತಂತ್ರ್ಯ ದಿನಾಚರಣೆ ಹಿಂದಿನ ದಿನವಾದ ಆಗಸ್ಟ್ 14 ರಿಂದ ಆಗಸ್ಟ್ 16 ರವರೆಗೆ (3-ದಿನ) ಎಲ್ಲಾ ಸರಕಾರಿ ಕಟ್ಟಡಗಳ ಹಾಗೂ ಸಾರ್ವಜನಿಕ ಮುಖ್ಯ ವೃತ್ತಗಳಲ್ಲಿ ಮತ್ತು ಧಾರವಾಡ ನಗರದ ಜುಬಲಿ ಸರ್ಕಲ್, ಕೋರ್ಟ್ ಸರ್ಕಲ್ ಹಾಗೂ ಕಾರ್ಗಿಲ್ ಸ್ತೂಪ್ದಲ್ಲಿ, ಕೆ.ಸಿ.ಡಿ. ಕಾಲೇಜು ವೃತ್ತ, ಡೆಪ್ಯೂಟಿ ಚನ್ನಬಸಪ್ಪ ಪ್ರತಿಮೆ, ಕೆ.ಜಿ. ಕುಂದಣಗಾರ ಪ್ರತಿಮೆ, ಹಾಗೂ ಹೆಡ್ ಪೋಸ್ಟ್ ಹತ್ತಿರದ ವೃತ್ತದಲ್ಲಿ ದೀಪಾಲಂಕಾರ ಮಾಡಲಾಗುವುದು ಎಂದು ಹೇಳಿದರು.
ಧಾರವಾಡ ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು, ಜಿಲ್ಲಾ ಕ್ರೀಡಾಂಗಣದಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಆಯಾ ಇಲಾಖೆಯ ಅಧಿಕಾರಿಗಳು ಸೂಚಿಸಬೇಕು. ಸರ್ಕಾರಿ ನೌಕರರ ಹಾಜರಾತಿಯನ್ನು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಪಡೆದು ಮರುದಿನ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಕ್ರೀಡಾಂಗಣದಲ್ಲಿ ಪೊಲೀಸ್ ಹಾಗೂ ವಿವಿಧ ಇಲಾಖೆಗಳಿಂದ, ಶಾಲಾ ಕಾಲೇಜುಗಳಿಂದ ಪರೇಡ ನಡೆಸಲಾಗುವುದು. ಅಂದು ಕಡ್ಡಾಯವಾಗಿ ಧಾರವಾಡ ನಗರದ ಎಲ್ಲ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಳಬೇಕು ಎಂದು ತಿಳಿಸಿದರು.
ಎಲ್ಲಾ ಅಧಿಕಾರಿಗಳು ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮಗೆ ವಹಿಸಿಕೊಡಲಾದ ಕಾರ್ಯಗಳನ್ನು ಕಟ್ಟುನಿಟ್ಟಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಹೇಳಿದರು.
ವೇದಿಕೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಪ್ರೊಬೇಷನರಿ ಐಎಎಸ್ ಅಧಿಕಾರಿ ಅನುಪ್ರಿಯಾ ಸಾಕ್ಯಾ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತ ಡಾ.ರುದ್ರೇಶ ಘಾಳಿ, ಡಿಸಿಪಿ ಶೃತಿ ಎನ್.ಎಸ್., ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಇದ್ದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸಾಂಸ್ಕೃತಿಕ ಹಾಗೂ ಕಲಾ ತಜ್ಞರು ಭಾಗವಹಿಸಿದ್ದರು.
- ಸುನಿಲ್ ಪಿ.ಸಜ್ಜನ್




















