ರಾಯಚೂರು/ ಸಿಂಧನೂರು ತಾಲೂಕಿನ ಗೋಮರ್ಸಿ ಗ್ರಾಮದಲ್ಲಿ ನಡೆಯುತ್ತಿದೆ ಎಂದು ಸಾರ್ವಜನಿಕರಿಂದ ದೂರುಗಳು ಬಂದಿದ್ದ ಅಕ್ರಮ ಮದ್ಯ ಮಾರಾಟದ ಕುರಿತು ಅಬಕಾರಿ ಇಲಾಖೆಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ.
ಗ್ರಾಮದ ವಿವಿಧ ಪ್ರದೇಶಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿ, ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಅಕ್ರಮ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿದ ನಿರುಪಾದಿ ಕೆ. ಗೋಮರ್ಸಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದಿಂದ ಯುವಜನತೆ,ಮಹಿಳೆಯರು ಹಾಗೂ ಕುಟುಂಬಗಳ ಸಾಮಾಜಿಕ ಮತ್ತು ಆರ್ಥಿಕ ಜೀವನದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ,ಈ ಅಕ್ರಮವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವುದು ಅತ್ಯಗತ್ಯವಾಗಿದೆ. ಆದ್ದರಿಂದ ಅಬಕಾರಿ ಇಲಾಖೆ ನಿರಂತರ ದಾಳಿ ನಡೆಸಿ,ಅಕ್ರಮ ಮದ್ಯ ಮಾರಾಟದಲ್ಲಿ ತೊಡಗಿರುವವರ ವಿರುದ್ಧ ಯಾವುದೇ ಒತ್ತಡಕ್ಕೆ ಮಣಿಯದೆ ಕಠಿಣ ಕಾನೂನು ಕ್ರಮ ಜರುಗಿಸಬೇಕು.
ಅಧಿಕಾರಿಗಳ ಈ ಪರಿಶೀಲನೆ ಕೇವಲ ಔಪಚಾರಿಕತೆಯಾಗದೆ, ಶಾಶ್ವತ ಪರಿಹಾರಕ್ಕೆ ದಾರಿ ಮಾಡಿಕೊಡಬೇಕು. ಗ್ರಾಮದಲ್ಲಿ ಮತ್ತೆ ಅಕ್ರಮ ಮದ್ಯ ಮಾರಾಟ ನಡೆಯದಂತೆ ಕಟ್ಟುನಿಟ್ಟಿನ ನಿಗಾವಹಿಸಿ, ಸಾರ್ವಜನಿಕರಿಗೆ ಸುರಕ್ಷಿತ ಮತ್ತು ಆರೋಗ್ಯಕರ ವಾತಾವರಣ ಕಲ್ಪಿಸಬೇಕು ಎಂದು ಆಗ್ರಹಿಸುತ್ತೇನೆ.
ಸಾರ್ವಜನಿಕರು ಸಹ ಅಕ್ರಮ ಚಟುವಟಿಕೆಗಳ ಬಗ್ಗೆ ಸಂಬಂಧಿಸಿದ ಇಲಾಖೆಗೆ ಮಾಹಿತಿ ನೀಡಿ, ಕಾನೂನು ಪಾಲನೆಗೆ ಸಹಕರಿಸುವಂತೆ ವಿನಂತಿಸುತ್ತೇನೆ ಎಂದು ತಿಳಿಸಿದರು.
- ಕರುನಾಡ ಕಂದ ಸುದ್ದಿ




















