
ಮಡಿಕೇರಿ :ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಬರ ಪರಿಸ್ಥಿತಿ ಕುರಿತು ನಡೆದ ಪರಿಶೀಲನಾ ಸಭೆಯಲ್ಲಿ ಮಾಹಿತಿ ಪಡೆದು ನೂತನ ಉಸ್ತುವಾರಿ ಸಚಿವರು ಮಾತನಾಡಿದರು.
ಹವಾಮಾನ ವೈಪರೀತ್ಯದಿಂದ ಈ ಬಾರಿ ಮುಂಗಾರು ಆರಂಭವಾಗುವುದು ತಡವಾಗಿದೆ. ಜಿಲ್ಲೆಯ ಅಲ್ಲಲ್ಲಿ ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆಗೆ ಹಿನ್ನಡೆಯಾಗಿದೆ. ಆದರೂ ಸಹ ಆಗಸ್ಟ್ ತಿಂಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು ಭತ್ತ ನಾಟಿ ಕಾರ್ಯ ಹಾಗೂ ಇತರೆ ಕೃಷಿ ಚಟುವಟಿಕೆ ನಡೆಯಲಿದೆ ಎಂದು ಸಚಿವರು ಹೇಳಿದರು.
ಜಿಲ್ಲೆಯಲ್ಲಿ ಮಳೆಯಿಂದಾಗಿ ಸ್ಥಳೀಯ ಸಂಸ್ಥೆ ಲೋಕೋಪಯೋಗಿ, ಪಂಚಾಯತ್ ರಾಜ್ ಇಲಾಖೆಯ ವ್ಯಾಪ್ತಿಯ ರಸ್ತೆಗಳು ಗುಂಡಿ ಬಿದ್ದಿದ್ದು ಇವುಗಳನ್ನು ಮುಚ್ಚಲು ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಮನವಿ ಮಾಡಲಾಗುವುದೆಂದು ಇದೇ ಸಂದರ್ಭದಲ್ಲಿ ಸಚಿವರು ತಿಳಿಸಿದರು.
ರಸ್ತೆ ಸರಿಪಡಿಸುವ ಸಂಬಂಧ ಟೆಂಡರ್ ಆಹ್ವಾನಿಸಬೇಕು. ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಕರ್ತವ್ಯ ನಿರ್ವಹಿಸಬೇಕು. ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸುವಂತಾಗಬೇಕು ಎಂದು ತಿಳಿಸಿದರು.
ಅತಿವೃಷ್ಟಿ ಮತ್ತು ಅನಾವೃಷ್ಟಿ ಸಂಬಂಧ ಸರಕಾರದಿಂದ ಅಗತ್ಯ ನೆರವು ನೀಡಲಾಗುವುದು ಎಂದರು. ಇದೇ ಆಶಯದಂತೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಿರ್ದೇಶನದಂತೆ ಅತಿವೃಷ್ಟಿ ಮತ್ತು ಬರ ಪರಿಸ್ಥಿತಿ ಕುರಿತು ಜಿಲ್ಲೆಯ ಹಾರಂಗಿ ಜಲಾಶಯ ಹಾಗೂ ಕೃಷಿ ಮತ್ತು ತೋಟಗಾರಿಕ ಬೆಳೆಗಳ ವೀಕ್ಷಣೆ, ಗೋಶಾಲಾ ವೀಕ್ಷಣೆ ನಡೆಸಿ, ಸಭೆ ನಡೆಸಲಾಗಿದೆ ಎಂದು ಸಚಿವರು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ ಅವರು, ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದ್ದು ಇದರಿಂದಾಗಿ ರಸ್ತೆ ಹಾಳಾಗಿದ್ದು ಗುಂಡಿಗಳನ್ನು ಮುಚ್ಚುವ ಕೆಲಸ ಆಗಬೇಕೆಂದು ಎಂಜಿನಿಯರ್ಗಳಿಗೆ ತಾಕೀತು ಮಾಡಿದರು.
ಈಗಾಗಲೇ ಟೆಂಡರ್ ಕರೆದು ಕಾಮಗಾರಿ ಆರಂಭಿಸಬೇಕಿತ್ತು. ಆದರೆ ಇನ್ನೂ ಟೆಂಡರ್ ಆಹ್ವಾನಿಸದೆ ಗುಂಡಿಮುಚ್ಚುವ ಕೆಲಸ ಆರಂಭವಾಗಿಲ್ಲ. ಹೀಗಾದರೆ ಸಾರ್ವಜನಿಕರ ಓಡಾಟ ಹೇಗೆ ಎಂದು ಮಂತರ್ ಗೌಡ ಅವರು ಪ್ರಶ್ನಿಸಿದರು.
ಕುಶಾಲನಗರದಲ್ಲಿ ಒಳಚರಂಡಿ ಕಾಮಗಾರಿ ಆರಂಭಿಸಿ ದಶಕಗಳೇ ಕಳೆದಿದ್ದರೂ ಸಹ ಕಾಮಗಾರಿ ಪೂರ್ಣಗೊಳಿಸದೇ ಇರುವುದಕ್ಕೆ ಶಾಸಕರು ತೀವ್ರ ಅತೃಪ್ತಿ ವ್ಯಕ್ತಪಡಿಸಿದರು.
ಒಳಚರಂಡಿ ಕಾಮಗಾರಿ ಅಪೂರ್ಣವಾಗಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ. ಆದ್ದರಿಂದ ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಸಚಿವರಲ್ಲಿ ಮನವಿ ಮಾಡಿದರು.
ವರದಿ : ಪ್ರಿತುನ್ ಪೂವಣ್ಣ




















