ಬೈಲಹೊಂಗಲ ನಗರಸಭೆ ವತಿಯಿಂದ ಸಾರ್ವಜನಿಕ ಆರೋಗ್ಯ, ಪರಿಸರ ಸಂರಕ್ಷಣೆ ಹಾಗೂ ಜಲಮೂಲಗಳ ಸ್ವಚ್ಛತೆಯನ್ನು ಕಾಪಾಡುವ ಉದ್ದೇಶದಿಂದ ಬರುವ ಗಣೇಶ ಹಬ್ಬದಂದು ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿ.ಓ.ಪಿ.) ಹಾಗೂ ರಾಸಾಯನಿಕ ಗುಣಗಳುಳ್ಳ ವಸ್ತುಗಳನ್ನು ಬಳಸಿ ತಯಾರಿಸಲಾದ ಶ್ರೀ ಗಣೇಶನ ಮೂರ್ತಿಗಳ ಉತ್ಪಾದನೆ, ಸಂಗ್ರಹ, ಮಾರಾಟ, ಪ್ರತಿಷ್ಠಾಪನೆ ಹಾಗೂ ಜಲಮೂಲಗಳಲ್ಲಿ ವಿಸರ್ಜನೆಯನ್ನು ನಿಷೇಧಿಸುವ ಕುರಿತು ಮಾನ್ಯ ಪೌರಾಯುಕ್ತರಾದ ಶ್ರೀಮತಿ ಭಾಗ್ಯಶ್ರೀ ಆರ್. ಹುಗ್ಗಿ ರವರ ಅಧ್ಯಕ್ಷತೆಯಲ್ಲಿ ನಗರದ ಮೂರ್ತಿ ತಯಾರಕರು, ಮಾರಾಟಗಾರರು ಹಾಗೂ ಶ್ರೀ ಗಣೇಶ ಉತ್ಸವ ಮಂಡಳಿಗಳ ಪ್ರತಿನಿಧಿಗಳ ಸಭೆಯನ್ನು ಆಯೋಜಿಸಲಾಯಿತು.
ಸಭೆಯನ್ನುದ್ದೇಶಿಸಿ ಮಾತನಾಡಿದ ಮಾನ್ಯ ಪೌರಾಯುಕ್ತರು, ಪರಿಸರ ಸಂರಕ್ಷಣೆ ಮತ್ತು ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಪಿ.ಓ.ಪಿ. ಹಾಗೂ ರಾಸಾಯನಿಕ ವಸ್ತುಗಳಿಂದ ತಯಾರಿಸಿದ ಗಣೇಶನ ಮೂರ್ತಿಗಳ ಬಳಕೆಯನ್ನು ಸಂಪೂರ್ಣವಾಗಿ ತಡೆಗಟ್ಟುವ ಅಗತ್ಯವಿದೆ ಎಂದು ತಿಳಿಸಿದರು. ಪಿ.ಓ.ಪಿ. ಮೂರ್ತಿಗಳು ನೀರಿನಲ್ಲಿ ಸುಲಭವಾಗಿ ಕರಗದೆ ಜಲಮೂಲಗಳ ಮಾಲಿನ್ಯಕ್ಕೆ ಕಾರಣವಾಗುವುದರಿಂದ, ಮೂರ್ತಿ ತಯಾರಕರು ಹಾಗೂ ಮಾರಾಟಗಾರರು ಪರಿಸರ ಸ್ನೇಹಿ ಮಣ್ಣಿನ ಗಣೇಶನ ಮೂರ್ತಿಗಳನ್ನು ಮಾತ್ರ ತಯಾರಿಸಿ ಮಾರಾಟ ಮಾಡುವಂತೆ ಸೂಚಿಸಿದರು.
ಅಲ್ಲದೆ, ಗಣೇಶೋತ್ಸವ ಮಂಡಳಿಗಳು ಹಾಗೂ ಸಾರ್ವಜನಿಕರು ಸರ್ಕಾರದ ನಿಯಮಗಳನ್ನು ಪಾಲಿಸಿ ಪರಿಸರ ಸ್ನೇಹಿ ಗಣೇಶೋತ್ಸವಕ್ಕೆ ಆದ್ಯತೆ ನೀಡಬೇಕು. ಗಣೇಶನ ಮೂರ್ತಿಗಳನ್ನು ಜಲಮೂಲಗಳಲ್ಲಿ ವಿಸರ್ಜಿಸುವ ಬದಲು ನಗರಸಭೆಯಿಂದ ಸೂಚಿಸಲಾಗುವ ಸೂಕ್ತ ವಿಸರ್ಜನಾ ವ್ಯವಸ್ಥೆಯನ್ನು ಬಳಸಿಕೊಳ್ಳುವಂತೆ ಮನವಿ ಮಾಡಿದರು. ನಿಯಮ ಉಲ್ಲಂಘನೆಯಾದಲ್ಲಿ ಸಂಬಂಧಿಸಿದವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಬೈಲಹೊಂಗಲ ಪೋಲಿಸ್ ಠಾಣೆಯ ಮಾನ್ಯ ಸಿ.ಪಿ.ಐ. ರವರಾದ ಶ್ರೀ ಪ್ರಮೋದ ಸಿ. ಯಲಿಗಾರ ರವರು ಮಾತನಾಡಿ, ಗಣೇಶೋತ್ಸವವು ಶಾಂತಿ, ಸೌಹಾರ್ದತೆ ಮತ್ತು ಭಕ್ತಿಭಾವದಿಂದ ನಡೆಯಬೇಕು. ಸಾರ್ವಜನಿಕರಿಗೆ ಅಥವಾ ಪರಿಸರಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಉತ್ಸವ ಮಂಡಳಿಗಳು ಮುನ್ನೆಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು. ಪಿ.ಓ.ಪಿ. ಹಾಗೂ ರಾಸಾಯನಿಕ ವಸ್ತುಗಳಿಂದ ತಯಾರಿಸಲಾದ ಗಣೇಶನ ಮೂರ್ತಿಗಳ ಉತ್ಪಾದನೆ, ಮಾರಾಟ ಹಾಗೂ ವಿಸರ್ಜನೆಗೆ ಸಂಬಂಧಿಸಿದ ನಿಯಮಗಳನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕು. ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ, ಪರಿಸರ ಸ್ನೇಹಿ ಹಾಗೂ ಶಾಂತಿಯುತವಾಗಿ ಗಣೇಶೋತ್ಸವ ಆಚರಿಸುವಂತೆ ಅವರು ಮನವಿ ಮಾಡಿದರು.
ಸಭೆಯಲ್ಲಿ ಹಿರಿಯ ಆರೋಗ್ಯ ನಿರೀಕ್ಷಕರಾದ ಶ್ರೀ ಸುರೇಶಗೌಡ ಎನ್. ಪಾಟೀಲ, ಕಿರಿಯ ಅಭಿಯಂತರಾದ ಶ್ರೀ ಬಸನಗೌಡ ಪಾಟೀಲ ಹಾಗೂ ಮೂರ್ತಿ ತಯಾರಕರು, ಮಾರಾಟಗಾರರು ಹಾಗೂ ಗಣೇಶೋತ್ಸವ ಮಂಡಳಿಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ವರದಿ ಮಂಜು ಎಂ.ಚಿಕ್ಕಣ್ಣವರ




















