ನಾಗರಾಳ: ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಹೆಮ್ಮೆಯಿಂದ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಆಕಾಶ್ ಸಿಂಧೆ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಅನೇಕ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ಹೋರಾಟದ ಫಲವಾಗಿ ನಮಗೆ ಸ್ವಾತಂತ್ರ್ಯ ದೊರೆತಿದೆ. ಮಹಾತ್ಮ ಗಾಂಧೀಜಿ, ಡಾ. ಬಿ.ಆರ್. ಅಂಬೇಡ್ಕರ್, ಭಗತ್ ಸಿಂಗ್, ನೇತಾಜಿ ಸುಭಾಷ್ ಚಂದ್ರ ಬೋಸ್ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೇರಿದಂತೆ ಅನೇಕ ಮಹನೀಯರ ತ್ಯಾಗವನ್ನು ಪ್ರತಿಯೊಬ್ಬರೂ ಸದಾ ಸ್ಮರಿಸಬೇಕು ಎಂದು ಹೇಳಿದರು.
ಶಾಲೆಯ ಮುಖ್ಯಗುರು ವಿಲಾಸ್ ರಾವ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಅಧ್ಯಕ್ಷ ದೇವೇಂದ್ರ ಹಾಗೂ ಆಕಾಶ್ ಸಿಂಧೆ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಶಿಕ್ಷಕರಾದ ಸಂತೋಷ್, ಅರ್ಚನಾ, ಮಲ್ಲಿಕಾರ್ಜುನ ಗುಂಗೆ, ಕಲ್ಲಪ್ಪ ಬಿರಾದಾರ್ ಸೇರಿದಂತೆ ಗ್ರಾಮದ ಮುಖಂಡರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನೇ ತ್ಯಾಗ ಮಾಡಿದ ಮಹನೀಯರನ್ನು ಸ್ಮರಿಸುವ ಮೂಲಕ ದೇಶಭಕ್ತಿ, ಏಕತೆ ಹಾಗೂ ಸಹೋದರತ್ವದ ಸಂದೇಶ ಸಾರಲಾಯಿತು. ವಿದ್ಯಾರ್ಥಿಗಳಲ್ಲಿ ದೇಶಪ್ರೇಮದ ಭಾವನೆ ಬೆಳೆಸುವ ಉದ್ದೇಶದಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮವು ದೇಶಭಕ್ತಿ ಹಾಗೂ ಸಂಭ್ರಮದ ವಾತಾವರಣದಲ್ಲಿ ಯಶಸ್ವಿಯಾಗಿ ನೆರವೇರಿತು.
- ಕರುನಾಡ ಕಂದ ಸುದ್ದಿ




















