ದೇಶಭಕ್ತಿ, ಸಂವಿಧಾನ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆಯೊಂದಿಗೆ ಸಂಭ್ರಮಿಸಿದ ಶಾಲಾ ಮಕ್ಕಳು
ಹಂದಿಗನೂರು: ಶ್ರೀ ಹಡಪದ ಅಪ್ಪಣ್ಣನವರ ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ಶಾಲೆ, ಹಂದಿಗನೂರಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮ, ಸಡಗರ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ಶ್ರೀ ಶರಣಯ್ಯ ಹಿರೇಮಠ ಅವರು ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು. ನಂತರ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರು ಹಾಗೂ ಸಂವಿಧಾನ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸಿದ ನಾಯಕರನ್ನು ಸ್ಮರಿಸಿ, ಅವರ ಭಾವಚಿತ್ರಗಳಿಗೆ ಗಣ್ಯರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಬಸ್ತಿಹಾಳ ಗ್ರಾಮದ ಯುವ ಹೋರಾಟಗಾರರು ಹಾಗೂ ಸಮಾಜ ಸೇವಕರಾದ ಶ್ರೀ ಸಿದ್ದು ಕಾಂಬಳೆ ಅವರು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ರಮೇಶಗೌಡ ಪಾಟೀಲ ಅವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಈರಗಂಟೆಪ್ಪಗೌಡ ಬಿರಾದಾರ ಅವರು ಸ್ವಾತಂತ್ರ್ಯ ಹೋರಾಟಗಾರ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ನಂತರ ಹಂದಿಗನೂರ ಗ್ರಾಮದ ಹಿರಿಯರಾದ ಶ್ರೀ ನಿಂಗಪ್ಪಗೌಡ ಬಿರಾದಾರ (ಕಲಗೋಡಿ) ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲಾ ಮಕ್ಕಳು ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರೂ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿ ದೇಶಭಕ್ತಿಯ ಭಾವನೆ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀ ಗುರುಪಾದ ಹಡಪದ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಗೌರವ ಅಧ್ಯಕ್ಷರಾದ ಶ್ರೀ ಮಾಂತಪ್ಪ ಹಡಪದ ಕೋರವಾರ, ಶ್ರೀ ಸಾಹೇಬಗೌಡ ಬಿರಾದಾರ, ಶ್ರೀ ಭೀಮಣ್ಣ ನೈಕೋಡಿ, ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಶ್ರೀ ಅರವಿಂದ ದೇಸಾಯಿ, ಜಯ ಕರ್ನಾಟಕ ಜಿಲ್ಲಾ ವಕ್ತಾರರಾದ ಶ್ರೀ ಚನ್ನಪ್ಪಗೌಡ ಬಿರಾದಾರ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಗ್ರಾಮದ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಯುವಕರು ಹಾಗೂ ಹಂದಿಗನೂರು ಸೇರಿದಂತೆ ಗುಬ್ಬೆವಾಡ, ಕಣ್ಣಗುಡ್ಡಿಹಾಳ, ಹಡಗಿನಾಳ ಮತ್ತು ಬಸ್ತಿಹಾಳ ಗ್ರಾಮಗಳ ಪಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಕ್ಕಳಿಗೆ ಪ್ರೋತ್ಸಾಹ ನೀಡಿದರು.
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಶಾಲೆಯ ಮುದ್ದು ಮಕ್ಕಳು ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇಶಭಕ್ತಿ ಹಾಗೂ ರಾಷ್ಟ್ರಪ್ರೇಮದ ಸಂದೇಶವನ್ನು ಸಾರಿದರು. ಮಕ್ಕಳಲ್ಲಿ ದೇಶದ ಇತಿಹಾಸ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಸಂವಿಧಾನದ ಮಹತ್ವದ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಗಿತ್ತು.
ಶಾಲೆಯ ಸಿಬ್ಬಂದಿ ವರ್ಗದವರಾದ ಮಲ್ಲಮ್ಮ ಹಡಪದ, ಅಂಬಿಕಾ ಹತ್ತರಕಾಳ, ರೇಷ್ಮಾ ನೈಕ್, ಧನ್ಯಾ ನೈಕ್ ಹಾಗೂ ಮಲ್ಲಿಕಾರ್ಜುನ ಹಡಪದ ಅವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಶಾಲಾ ಆಡಳಿತ ಮಂಡಳಿ, ಶಿಕ್ಷಕ ವೃಂದ, ಪಾಲಕರು ಹಾಗೂ ಗ್ರಾಮಸ್ಥರ ಸಹಕಾರದಿಂದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
“ಸ್ವಾತಂತ್ರ್ಯವು ನಮ್ಮ ಹಕ್ಕು ಮಾತ್ರವಲ್ಲ, ಅದನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಭಾರತೀಯನ ಜವಾಬ್ದಾರಿ” ಎಂಬ ಸಂದೇಶದೊಂದಿಗೆ ಕಾರ್ಯಕ್ರಮವು ದೇಶಭಕ್ತಿ ಹಾಗೂ ರಾಷ್ಟ್ರಪ್ರೇಮದ ವಾತಾವರಣದಲ್ಲಿ ಸಂಪನ್ನಗೊಂಡಿತು.




















