ಮಧುಗಿರಿ: ಆಗಸ್ಟ್ 20ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಿತರಕ್ಷಣಾ ಸಮಿತಿ ಸಭೆಗೆ ತಾಲೂಕು ಆಡಳಿತದ ಅಧಿಕಾರಿಗಳು ಗೈರಾಗಿರುವುದನ್ನು ಖಂಡಿಸಿ ದಲಿತ ಸಂಘಟನೆಗಳ ಮುಖಂಡರು ಇಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕು ಆಡಳಿತದ ವತಿಯಿಂದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕರೆಯಲಾಗಿದ್ದ ಸಭೆಗೆ ಸಂಬಂಧಪಟ್ಟ ಇಲಾಖೆಗಳ E O ಸೇರಿದಂತೆ ಯಾವುದೇ ಅಧಿಕಾರಿಗಳು ಹಾಜರಾಗಲಿಲ್ಲ. ಇದರಿಂದ ಬೇಸತ್ತ ದಲಿತ ಮುಖಂಡರು ಸಭೆಯನ್ನು ಬಹಿಷ್ಕರಿಸಿ, ನಂತರ ಉಪವಿಭಾಗಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ತೊಂಡೊಟಿ ರಾಮಾಂಜಿನಪ್ಪ ಅವರು ಮಾತನಾಡಿ, “ದಲಿತರ ಮಧುಗಿರಿ ತಾಲೂಕಿನಲ್ಲಿ ದಲಿತರ ಹಿತರಕ್ಷಣೆಗೆ ಸಂಬಂಧಿಸಿದ ಸಭೆಗಳಿಗೆ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಿ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಲ್ಪಿಸಬೇಕು. ಆದರೆ ಸಭೆಗೆ ಅಧಿಕಾರಿಗಳು ಗೈರಾಗಿರುವುದು ದಲಿತ ಸಮುದಾಯವನ್ನು ನಿರ್ಲಕ್ಷಿಸಿದಂತಾಗಿದೆ” ಎಂದು ಆಕ್ರೋಶ ಹೊರಹಾಕಿದರು. ಮಧುಗಿರಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕಚೇರಿ ಬಳಿ ಕ್ರಾಂತಿ ಗೀತೆಗಳನ್ನಾಡುತ್ತಾ ದಲಿತರ ಕುಂದು ಕೊರತೆ ಸಭೆಗೆ ಹಾಜರಾಗದ ಅಧಿಕಾರಿಗಳ ವಿರುದ್ಧ ಎಸ್ ಸಿ ಎಸ್ ಟಿ ದೌರ್ಜನ್ಯ ಕಾಯ್ದೆ ಅಡಿ ಕೇಸ್ ದಾಖಲಿಸಲು ಅರ್ಜಿ ನೀಡಿದರು ಹಾಗೂ ಮಧುಗಿರಿ ತಾಲೂಕು ಉಪವಿಭಾಗಾಧಿಕಾರಿಗಳ ಕಚೇರಿ ಮುಂದೆ ಕೆಲಕಾಲ ಧರಣಿ ಕುಳಿತು ಘೋಷಣೆಗಳು ಕೂಗುತ್ತಾ ತಪ್ಪಿತಸ್ಥಾಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲು ಹೇಳಿದರು
ಮೂಲಭೂತ ಸಮಸ್ಯೆಗಳು ಬಗೆಹರಿಯದೆ
ದಲಿತ ಮುಖಂಡರು ಮಾತನಾಡಿ, ತಾಲೂಕಿನಲ್ಲಿ ದಲಿತ ಸಮುದಾಯಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳು ಇಂದಿಗೂ ಬಗೆಹರಿಯದೆ ಉಳಿದಿವೆ. ಗ್ರಾಮಗಳಲ್ಲಿ ಕುಡಿಯುವ ನೀರು, ಚರಂಡಿ, ಬೀದಿ ದೀಪ* ಸೇರಿದಂತೆ ಮೂಲಭೂತ ಸೌಕರ್ಯಗಳ ಕೊರತೆಯಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಪಂದಿಸಬೇಕೆಂದು ಆಗ್ರಹಿಸಿದರು.
ದಲಿತರನ್ನು ನಿರ್ಲಕ್ಷಿಸಿ ತಾರತಮ್ಯ ಧೋರಣೆ ಅನುಸರಿಸುತ್ತಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ದಲಿತ ಹಿತರಕ್ಷಣಾ ಸಭೆಗಳಿಗೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಿ, ದಲಿತರ ಕುಂದುಕೊರತೆಗಳನ್ನು ಆಲಿಸಿ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು.
ಸಭೆಗೆ ಗೈರಾದ ಅಧಿಕಾರಿಗಳ ವಿರುದ್ಧ ಮೇಲಾಧಿಕಾರಿಗಳು ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ತಾಲೂಕು ಆಡಳಿತದ ವಿರುದ್ಧ ಹೋರಾಟವನ್ನು ತೀವ್ರಗೊಳಿಸುವುದಾಗಿ ದಲಿತ ಸಂಘಟನೆಗಳ ಮುಖಂಡರು ಎಚ್ಚರಿಕೆ ನೀಡಿದರು.
ವರದಿ: ರಂಗರಾಜು ಎಂ ಗರಣಿ




















