ಮಡಿಕೇರಿ: ಪಶ್ಚಿಮಘಟ್ಟ ಪರಿಸರ ಸೂಕ್ಷ್ಮ ವಲಯದ ಪಟ್ಟಿಯಿಂದ ಕೊಳಗದಾಳು ಗ್ರಾಮವನ್ನು ಕೈಬಿಡುವಂತೆ ಒತ್ತಾಯಿಸಿ ಕಸ್ತೂರಿ ರಂಗನ್ ವರದಿ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಗ್ರಾಮಸ್ಥರು ಶಾಂತಿಯುತ ಮೆರವಣಿಗೆ ನಡೆಸಿ, ಬೆಂಗಳೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿಪಿನ್ ಅವರಿಗೆ ಆಕ್ಷೇಪಣೆ ಸಲ್ಲಿಸಿದರು.
ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಜುಲೈ 27, 2026ರಂದು ಪ್ರಕಟಿಸಿರುವ ಹೊಸ ಕರಡು ಅಧಿಸೂಚನೆಯಲ್ಲಿ ಕೊಡಗು ಜಿಲ್ಲೆಯ 55 ಗ್ರಾಮಗಳನ್ನು ಪರಿಸರ ಸೂಕ್ಷ್ಮವಲಯ ಪಟ್ಟಿಗೆ ಸೇರ್ಪಡೆಗೊಳಿಸಲಾಗಿದೆ. ಈ ಪಟ್ಟಿಯಲ್ಲಿ ಕೊಳಗದಾಳು ಗ್ರಾಮವೂ ಸೇರಿದೆ.
ಕೊಳಗದಾಳು ಗ್ರಾಮದಲ್ಲಿ ಶತಮಾನಗಳಿಂದ ರೈತರು, ಕೃಷಿ ಕಾರ್ಮಿಕರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಜನರು ವಾಸಿಸುತ್ತಿದ್ದು, ಬಹುತೇಕ ಕುಟುಂಬಗಳು ಕೃಷಿಯನ್ನೇ ಅವಲಂಬಿಸಿವೆ. ಗ್ರಾಮದಲ್ಲಿ ಶಾಲೆ, ಅಂಗನವಾಡಿ, ವಸತಿ ಪ್ರದೇಶ, ಸಮುದಾಯ ಭವನ, ರಸ್ತೆಗಳು, ಕುಡಿಯುವ ನೀರಿನ ಪೈಪ್ಲೈನ್ಗಳು ಹಾಗೂ ನೈಸರ್ಗಿಕ ನೀರಿನ ಟ್ಯಾಂಕ್ಗಳಿವೆ.
ಈಗಾಗಲೇ ಅರಣ್ಯದ ಅಂಚಿನಲ್ಲಿರುವ ಗ್ರಾಮದಲ್ಲಿ ನಿರಂತರ ವನ್ಯಜೀವಿಗಳ ಹಾವಳಿ ಎದುರಾಗುತ್ತಿದ್ದು, ಕೃಷಿ ಬೆಳೆ ಹಾನಿ ಹಾಗೂ ಮಾನವ ಪ್ರಾಣ ಹಾನಿಯಂತಹ ಘಟನೆಗಳು ಸಂಭವಿಸುತ್ತಿವೆ. ಗ್ರಾಮದ ಒಟ್ಟು ಭೂಪ್ರದೇಶದ ಗಣನೀಯ ಭಾಗ ಈಗಾಗಲೇ ಮೀಸಲು ಅರಣ್ಯ ಹಾಗೂ ದೇವರಕಾಡುಗಳಿಂದ ಕೂಡಿದೆ. ಇಂತಹ ಸಂದರ್ಭದಲ್ಲಿ ಗ್ರಾಮವನ್ನು ಪರಿಸರ ಸೂಕ್ಷ್ಮವಲಯಕ್ಕೆ ಸೇರಿಸಿದರೆ ಕೃಷಿಕರು ಹಾಗೂ ಬಡ ಕುಟುಂಬಗಳ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದರು.
ಕೊಳಗದಾಳು ಗ್ರಾಮವನ್ನು ಪರಿಸರ ಸೂಕ್ಷ್ಮವಲಯದ ವ್ಯಾಪ್ತಿಯಿಂದ ಕೈಬಿಟ್ಟು, ಕರಡು ಅಧಿಸೂಚನೆಯಿಂದ ಗ್ರಾಮ ಹಾಗೂ ಕೊಡಗು ಜಿಲ್ಲೆಗೆ ಉಂಟಾಗಬಹುದಾದ ಅನಾಹುತಗಳನ್ನು ತಪ್ಪಿಸಬೇಕು. ಗ್ರಾಮಸ್ಥರು ನೆಮ್ಮದಿಯಿಂದ ಕೃಷಿ ಚಟುವಟಿಕೆ ಮುಂದುವರಿಸಲು ಅವಕಾಶ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಸಾರ್ವಜನಿಕರು, ರೈತರು, ಗ್ರಾಮ ಪಂಚಾಯಿತಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳು ಆಕ್ಷೇಪಣೆ ಅಥವಾ ಸಲಹೆ ಸಲ್ಲಿಸಲು ಕೇಂದ್ರ ಸರ್ಕಾರ 60 ದಿನಗಳ ಕಾಲಾವಕಾಶ ನೀಡಿದ್ದು, ಗ್ರಾಮಸ್ಥರ ಮನವಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕೆಂದು ಪ್ರತಿಭಟನೆಯ ಮೂಲಕ ಒತ್ತಾಯಿಸಲಾಯಿತು.
ವರದಿ : ಪ್ರಿತುನ್ ಪೂವಣ್ಣ




















